ಗೆಲುವು ನಮ್ಮದೆ, ಮಾತಿನ ಮೇಲೆ ನಿಗಾ ಇರಲಿ; ಸಚಿವರಿಗೆ ಮೋದಿ ಕೊಟ್ಟ ಖಡಕ್ ಸೂಚನೆಗಳೇನು?
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಇದೇ ವೇಳೆ ಅವರು ಸಚಿವರಿಗೆ ಹಲವು ಸೂಚನೆ ನೀಡಿದ್ದಾರೆ.
ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಈಗಾಗಲೇ ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ (BJP Candidates List) ಮಾಡಿದ್ದು, ಹೊಸ ಮುಖಗಳಿಗೆ ಆದ್ಯತೆ ನೀಡಿದೆ. ಇನ್ನು 100 ದಿನಗಳವರೆಗೆ ವಿಶ್ರಮಿಸದಿರಿ ಎಂದು ಕಾರ್ಯಕರ್ತರಿಗೆ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಸಚಿವರೊಂದಿಗೆ ಸಭೆ ನಡೆಸಿದ ಮೋದಿ, ವಿವಾದಾತ್ಮಕ ಹೇಳಿಕೆಗಳಿಂದ ದೂರ ಇರಿ ಎಂಬುದಾಗಿ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಲೋಕಸಭೆ ಚುನಾವಣೆ, ವಿಕಸಿತ ಭಾರತ ನಿರ್ಮಾಣಕ್ಕಾಗಿ ಸಿದ್ಧತೆ, ಮುಂದಿನ ಐದು ವರ್ಷಗಳವರೆಗೆ ಕೈಗೊಳ್ಳಬೇಕಾದ ಯೋಜನೆಗಳ ಜಾರಿ ಸೇರಿ ಹಲವು ವಿಷಯಗಳನ್ನು ಚರ್ಚಿಸಲು ಮೋದಿ ಸಚಿವರೊಂದಿಗೆ ಸಭೆ ನಡೆಸಿದರು. “ಮುಂಬರುವ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ನಾವು ಶೀಘ್ರದಲ್ಲಿಯೇ ಹೀಗೆ ಮತ್ತೊಂದು ಸಭೆ ನಡೆಸುತ್ತೇವೆ. ಆದರೆ, ಚುನಾವಣೆ ವೇಳೆ ಸಚಿವರು ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು. ಸಾರ್ವಜನಿಕರೊಂದಿಗೆ ಬೆರೆತು, ಕೇಂದ್ರದ ಯೋಜನೆಗಳನ್ನು ಅವರಿಗೆ ತಲುಪಿಸಿ. ಆದರೆ, ಯಾವುದೇ ಕಾರಣಕ್ಕೂ ವಿವಾದಾತ್ಮಕ ಹೇಳಿಕೆ ನೀಡದಿರಿ” ಎಂಬುದಾಗಿ ಮೋದಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
First Published on Vistara News.

Comments
Post a Comment